[1]ಮಂಗಳೂರು :ಮಂಗಳೂರು ಮಾಜಿ ಜಿಲ್ಲಾದಿಕಾರಿ ಡಾ.ಎನ್.ಎಸ್.ಚನ್ನಪ್ಪಗೌಡ ರವರು ನೂತನ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ದ.ಕ.ಜಿಲ್ಲೆಯ 123ನೇ ಜಿಲ್ಲಾಧಿಕಾರಿಯಾಗಿ ಎನ್.ಪ್ರಕಾಶ್ ರವರು ಅಧಿಕಾರ ವಹಿಸಿಕೊಂಡರು. ಈ ಮೊದಲು ಇವರು ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 1955 ರಲ್ಲಿ ಜನಿಸಿದ ಇವರು ನಂಜನಗೂಡಿನಲ್ಲಿ ತನ್ನ ಪದವಿವರೆಗಿನ ಶಿಕ್ಷಣವನ್ನು ಪೂರೈಸಿ ನಂತರ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಇತಿಹಾಸ ವಿಭಾಗದಲ್ಲಿ 2ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿ ನಂತರ ರೇಣುಕಾಚಾರ್ಯ ಕಾಲೇಜಿನಲ್ಲಿ ತನ್ನ ಕಾನೂನು ಪದವಿಯನ್ನು ಪೂರ್ಣಗೊಳಿಸಿ, 1978 ರಲ್ಲಿ ಸರಕಾರಿ ಸೇವೆಗೆ ಗ್ರೂಪ್ ಬಿ ಹುದ್ದೆಗೆ ಸೇರ್ಪಡೆಗೊಂಡರು. ನಂತರ ಕೆ.ಪಿ.ಎಸ್.ಸಿ ಪರೀಕ್ಷೆ ತೇರ್ಗಡೆ ಹೊಂದಿ ಕೆ.ಪಿ.ಎಸ್.ಸಿ ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಗಿ ನೇಮಕಗೊಂಡು, ಬಳಿಕ ಸರ್ಕಾರದ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಇದೆ ಮೊದಲ ಬಾರಿಗೆ ಮಂಗಳೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದಾಗಿ ಅವರು ಹೇಳಿದರು.
ಅಧಿಕಾರ ಸ್ವೀಕರಿಸಿದ ನಂತರ ಪತ್ರಕರ್ತರ ಜತೆ ಮಾತನಾಡಿದ ಅವರು ಸರಕಾರದ ಯೋಜನೆಗಳಿಗೆ ಒತ್ತುಕೊಟ್ಟು ಅದನ್ನು ಜನಸಾಮಾನ್ಯರಿಗೆ ಮುಟ್ಟಿಸುವುದಾಗಿ ಹೇಳಿದರು. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾತನಾಡಿದ ಅವರು ಈ ಹಿಂದಿನ ಜಿಲ್ಲಾಧಿಕಾರಿ ಕೈಗೊಂಡಿರುವ ಕ್ರಮವನ್ನು ಇನ್ನಷ್ಟು ವಿಸ್ತರಿಸುವುದಾಗಿ ತಿಳಿಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ್, ಪಾಲಿಕೆ ಆಯುಕ್ತ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ್ ಪ್ರಕಾಶ್ ಉಪಸ್ಥಿತರಿದ್ದರು.