[1]ಉಳ್ಳಾಲ: ತೀವ್ರ ಕಡಲ್ಕೊರೆತದ ಪರಿಣಾಮ ಉಚ್ಚಿಲ ಭಾಗದಲ್ಲಿ ಸಂಪರ್ಕ ರಸ್ತೆ ಕೊಚ್ಚಿ ಹೋಗಿದೆ. ಇದಕ್ಕೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲದ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಹಾಗೂ ಇನ್ನಿತರ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯು.ಟಿ.ಖಾದರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪ್ರತಿ ವರ್ಷ ಕಡಲು ಕೊರೆತದಿಂದ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಪ್ರಾಣಿ, ಪಕ್ಷಿಗಳ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೆವು. ಎರಡು ತಿಂಗಳಿಂದ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಉಚ್ಚಿಲ ಸಂಪರ್ಕ ರಸ್ತೆ ಕಡಿತಗೊಂಡಿದ್ದು, ಇದರಿಂದ ಸ್ಥಳೀಯ ಜನ ಆತಂಕಕ್ಕೆ ಒಳಗಾಗಿದ್ದಾರೆ.
ಈ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗಿದೆ. ಅತೀ ಶೀಘ್ರದಲ್ಲಿ ಪರಿಹಾರದ ಕುರಿತು ಉನ್ನತ ಮಟ್ಟದ ಸಭೆ ಕರೆಯುವುದು ಆಡಳಿತದ ಜವಬ್ದಾರಿಯಾಗಿದ್ದು, ಸ್ಥಳೀಯ ಶಾಸಕನಾಗಿ ಸಭೆ ಏರ್ಪಡಿಸುವಾಗ ನನ್ನನ್ನು ಕರೆಯಬೇಕು. ಕಳೆದ ಎರಡು ತಿಂಗಳಿನಿಂದ ಯಾವುದೇ ಸಭೆಗೆ ನನ್ನನ್ನು ಕರೆಯದೆ ನಿರ್ಲಕ್ಷ್ಯ ಮಾಡಲಾಗಿದೆ. ಇನ್ನಾದರೂ ಎಲ್ಲಾ ಚರ್ಚೆ ಹಾಗೂ ಸಭೆಗಳಲ್ಲಿ ನನ್ನನ್ನು ಕರೆಯಲಿ ಎಂದು ಶಾಸಕ ಯು.ಟಿ ಖಾದರ್ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.