[1]ಪುತ್ತೂರು : ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡು ನಂದಿಸಲು ಬಂದವರನ್ನು ಬಿಡದೆ ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ.
ಸ್ಟೇಶನರಿ ಸಾಮಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಗೆ ಮಾವಿನಕಟ್ಟೆ ನಿವಾಸಿ ಮಹಮ್ಮದ್ ಬೆಂಕಿ ಹಚ್ಚಿದವರು. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್, ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ಏಕಾಏಕಿ ತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಬೆಂಕಿ ನಂದಿಸುತ್ತಿರುವ ಸ್ಥಳೀಯರುಬೆಂಕಿ ಹಾಕುತ್ತಿದ್ದ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದರು. ಆ ವೇಳೆ ಬೆಂಕಿ ನಂದಿಸದಂತೆ ಮಾಲೀಕ ಮಹಮ್ಮದ್ ತಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ವೇಳೆಗೆ ಸ್ಥಳೀಯರು ಪೊಲೀಸರಿಗೂ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣಾ ಎಎಸ್ಐ ತಿಮ್ಮಯ್ಯಗೌಡ, ಈಶ್ವರಮಂಗಲ ಹೊರಠಾಣಾ ಪೊಲೀಸ್ ಸಿಬ್ಬಂದಿ ಬಸವರಾಜ್, ಪ್ರಶಾಂತ್ ಮತ್ತಿತರರು ಆಗಮಿಸಿ ಬೆಂಕಿ ನಂದಿಸಲು ಸಹಕಾರ ನೀಡಿದರು.