ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ 117 ಕೋಟಿ ರೂ. ವಂಚಿಸಲು ಪ್ಲಾನ್, ದಕ್ಷಿಣ ಕನ್ನಡದ ಆರು ಮಂದಿ ವಶ

1:29 PM, Tuesday, October 6th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

Andra policeಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಅಲ್ಲಿನ  ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ.

ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40), ಉದಯ ಶೆಟ್ಟಿ ಕಾಂತಾವರ( 35), ಮಂಗಳೂರಿನ ಬ್ರಿಜೆಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಆಂಧ್ರದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರ ಮೇರೆಗೆ ಸೆ. 21ರಂದು ಆಂಧ್ರ ಪ್ರದೇಶದ ತುಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 117 ಕೋಟಿ ರೂ. ವಂಚಿಸಲು ಇವರು ಯೋಜನೆ ರೂಪಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಂಧ್ರ ಪ್ರದೇಶದ ಸರ್ಕಾರ, ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಗರ ಭ್ರಷ್ಟಾಚಾರ ಪತ್ತೆ ದಳ (ಎಸಿಬಿ)ಕ್ಕೆ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಿದ ಎಸಿಬಿ, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ದಕ್ಷಿಣ ಉಪ ವಿಭಾಗದ ಸಹಾಯಕ ಆಯುಕ್ತ ಕೆ.ಯು.ಬೆಳ್ಳಿಯಪ್ಪ, ಆಂಧ್ರ ಪ್ರದೇಶದ ಪೊಲೀಸರು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ನಮ್ಮ ಪೊಲೀಸರು ಸಹಕಾರ ನೀಡಿದ್ದಾರೆ ಎಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English