[1]ಮಂಗಳೂರು : ಸರ್ಕಾರ ತೃತೀಯ ಲಿಂಗದವರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ, ಇದರ ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಎ.ಜಿ ಕರೆ ನೀಡಿದರು.
ಅವರು ಭಾನುವಾರ ಕದ್ರಿಯ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಆಯೋಜಿಸಿದ ದುರ್ಬಲ ವರ್ಗಗಳ ದಿನದ ಅಂಗವಾಗಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಅವರುಗಳನ್ನು ಅರ್ಹ ಫಲಾನುಭವಿಗಳಾನ್ನಗಿಸಬೇಕೆಂದು ತಿಳಿಸಿದರು.
1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ದೀಪಾ ವಿ ಮಾತನಾಡಿ ಲಿಂಗತ್ವ ಅಲ್ಪಸಂಖ್ಯಾತರು ಪೊಲೀಸ್ ಇಲಾಖೆ, ನ್ಯಾಯಾಂಗ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವುದರ ಜೊತೆಗೆ ಭರತನಾಟ್ಯಗಳಲ್ಲಿಯೂ ಸಹ ಸಾಧನೆ ಮಾಡಿರುವುದರ ಬಗ್ಗೆ ಉದಾಹರಣೆ ನೀಡಿ ತಿಳಿಸುವುದರೊಂದಿಗೆ ಇತರರು ಸಹ ಇದೇ ರೀತಿ ಸಾಧನೆ ಮಾಡಲು ಮುಂದಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ಕೆ ಕರ್ಗಿ, ಮಂಗಳೂರು ಗ್ರಾಮಾಂತರ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಹೆಚ್ ವಿ, ಮಂಗಳೂರು ವಕೀಲರ ಸಂಘ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು ಮಾಧುರಿ ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.