[1]ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಪರ್ಸಿನ್ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹಸ್ತಾಂತರಿಸಿದರು.
ಬಳಿಕ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಲಾಗಿದೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ, ಕರಾವಳಿ ಕಾವಲುಪಡೆಯನ್ನು ಬಲಪಡಿಸಬೇಕೆಂದು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮೀನುಗಾರರ ಕುಟುಂಬದವರು ಬಡವರಾಗಿದ್ದು, 10 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಮೀನುಗಾರರ ಕುಟುಂಬದಿಂದ ಒತ್ತಾಯ ಕೇಳಿ ಬರುತ್ತಿದೆ. ಈಗಿರುವ ನಿಯಮದ ಪ್ರಕಾರ ಗರಿಷ್ಠ ಆರು ಲಕ್ಷ ರೂ. ಪರಿಹಾರ ಒದಗಿಸಲು ಸಾಧ್ಯ. ಒಂದು ವಾರದೊಳಗೆ ನಾನು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರು ಸೇರಿ ಸಿಎಂ ಭೇಟಿ ಮಾಡಿ ಇನ್ನು ನಾಲ್ಕು ಲಕ್ಷ ರೂ. ಸೇರಿಸಿ 10 ಲಕ್ಷ ರೂ. ಪರಿಹಾರ ನೀಡುವಂತೆ ಮನವಿ ಮಾಡುತ್ತೇವೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.