[1]ಮಂಗಳೂರು: ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು.
ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಇದಕ್ಕೆ ಬೆಂಬಲ ಸೂಚಿಸಿದ ದ.ಕ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ.
ವೈದ್ಯರು ಕಪ್ಪು ಪಟ್ಟಿ ಧರಿಸಿ, ಕಪ್ಪು ಬಾವುಟ ಹಾರಿಸಿ ಪ್ರತಿಭಟನೆಯಲ್ಲಿ ಭಾಗಿಯಾದರು. ಇಂದು ಜಿಲ್ಲಾಸ್ಪತ್ರೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕೋವಿಡ್ ಮತ್ತು ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ಹೊರರೋಗಿಗಳ ಸೇವೆ ಸ್ಥಗಿತಗೊಂಡಿದೆ.