[1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ರಾಮಚಂದ್ರ ಬಾಯರಿ ಅವರು ಇಂದು ಸೇವೆಯಿಂದ ನಿವೃತ್ತಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಡಾ.ರಾಮಚಂದ್ರ ಬಾಯರಿ ಅವರನ್ನು ಸರ್ಕಾರ ದ.ಕ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಿಸಿತ್ತು.
ರಾಮಚಂದ್ರ ಬಾಯರಿ ಅವರು ಆರೋಗ್ಯಾಧಿಕಾರಿಯಾದ ಬಳಿಕ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಆರಂಭಿಸಿದ್ದರು. ಇದೇ ವೇಳೆ ಅವರಿಗೂ ಕೊರೊನಾ ಕಾಣಿಸಿತ್ತು. ಗುಣಮುಖರಾದ ಬಳಿಕ ಮತ್ತೆ ಸೇವೆಗೆ ಮರಳಿದ್ದರು.
ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಿ ಅವರ ಸೇವೆ ಸ್ಮರಿಸಲಾಯಿತು.
ಸಚಿವರಾದ ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ, ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ, ದ.ಕ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್ ಮೊದಲಾದವರು ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.