[1]ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ವಿನಯ್ ಹಾಗೂ ಅವರ ಅಭಿಮಾನಿಗಳಿಗೆ ಹೈಕೋರ್ಟ್, ಜಾಮೀನು ಅರ್ಜಿಯನ್ನೇ ವಜಾಗೊಳಿಸುವ ಮೂಲಕ ಶಾಕ್ ನೀಡಿದೆ.
ಹೌದು! ಚಾರ್ಜಶೀಟ್ ಸಲ್ಲಿಕೆಯಾದ ಬಳಿಕ ವಿನಯ್ ಪರ ವಕೀಲರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ವಜಾಗೊಂಡ ಬಳಿಕ ಮತ್ತೆ ಬೆಂಗಳೂರಿನ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇತ್ತೀಚೆಗಷ್ಟೆ ಹೈಕೋರ್ಟ್ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಇನ್ನು ಜಾಮೀನು ಕೋರಿ ವಿನಯ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಗಿದೆ.
ಚಾರ್ಜ್ ಶೀಟ್ ಸಲ್ಲಿಕೆಯಾಗುವ ಮುಂಚೆಯೇ ಧಾರವಾಡ ಜಿಲ್ಲಾ ನ್ಯಾಯಾಲಯ ಹಾಗೂ ಹೈಕೋರ್ಟ್ ನಲ್ಲಿ ವಿನಯ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಲ್ಲಿಯೂ ಅವರ ಅರ್ಜಿ ವಜಾಗೊಂಡಿತ್ತು. ಇದೀಗ ಬೆಂಗಳೂರಿನ ಹೈಕೋರ್ಟ್ ಕೂಡ ಜಾಮೀನು ಅರ್ಜಿ ವಜಾಗೊಳಿಸಿದೆ.
ನವೆಂಬರ್ ತಿಂಗಳಿನಲ್ಲಿ ವಿನಯ್ ಅವರು ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.