[1]ಮಂಗಳೂರು: ಎಂಆರ್ಪಿಎಲ್ನ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡಲಿಲ್ಲ ಎಂದು ಆಕ್ಷೇಪಿಸಿ ದೂರುಗಳು ಬಂದ ಹಿನ್ನಲೆಯಲ್ಲಿ ಸಂಸದ ನಳಿನ್ಕುಮಾರ್ ಕಟೀಲು ಅವರು ಎಂಆರ್ಪಿಎಲ್ನ ಆಡಳಿತ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಅವರು ನಿರ್ದೇಶಿಸಿದ್ದಾರೆ.
ಎಂಆರ್ಪಿಎಲ್ 200 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಈ ನೇಮಕಾತಿಯಲ್ಲಿ ಕರ್ನಾಟಕ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಂಸದರ ಅಧ್ಯಕ್ಷತೆಯಲ್ಲಿ ಎಂಆರ್ಪಿಎಲ್ನ ಆಡಳಿತ ನಿರ್ದೇಶರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು.
ನೇಮಕಾತಿಯನ್ನು ತಡೆಹಿಡಿಯಬೇಕು. ಮುಂದಿನ ನೇಮಕಾತಿ ಸಂದರ್ಭ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸೂಚಿಸಲಾಯಿತು. ನೇಮಕಾತಿಯನ್ನು ತಡೆಹಿಡಿಯುವುದಾಗಿ ಎಂಆರ್ಪಿಎಲ್ ಆಡಳಿತ ನಿರ್ದೇಶಕರು ಸಭೆಗೆ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್ ಉಮಾನಾಥ ಕೋಟ್ಯಾನ್, ಡಾ| ವೈ. ಭರತ್ ಶೆಟ್ಟಿ ಭಾಗವಹಿಸಿದ್ದರು.