[1]ಚಿಕ್ಕಮಗಳೂರು: ಸ್ಯಾಂಡಲ್ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಂತ್ಯಕ್ರಿಯೆ ಮಂಗಳವಾರ ಅವರ ಸ್ವಗ್ರಾಮದಲ್ಲಿ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ಸ್ನೇಹಿತ ರಘು ಅವರ ತೋಟದಲ್ಲಿ ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಅಂತ್ಯಕ್ರಿಯೆ ಮೊದಲು ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಿದರು.
ಚಿಕ್ಕಂದಿನಲ್ಲೇ ಅಪ್ಪ-ಅಮ್ಮನನ್ನ ಕಳೆದುಕೊಂಡರೂ ಗ್ರಾಮದಲ್ಲೇ ಬೆಳೆದು ರಾಷ್ಟ್ರ ಪ್ರಶಸ್ತಿ ಗಳಿಸಿ ಮನೆ ಮಗನ ಅಂತ್ಯಸಂಸ್ಕಾರ ಗ್ರಾಮದಲ್ಲೇ ಆಗಬೇಕೆಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಹಾಗಾಗಿ ಗ್ರಾಮದಲ್ಲೇ ಅಂತ್ಯಸಂಸ್ಕಾರ ನಡೆಸಲಾಯಿತು. ವಿಜಯ್ ಮೃತದೇಹ ಸ್ವ-ಗ್ರಾಮಕ್ಕೆ ತೆರಳುತ್ತಿದ್ದಂತೆಯೇ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಕಿಕ್ಕಿರಿದು ನೆರೆದರು. ನಟನ ಅಂತಿಮ ದರ್ಶನಕ್ಕೆ ಜನಸಾಗರ ನೆರೆದಿದ್ದರಿಂದ ಪೊಲಿಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಯಿತು. ಫಿಲಂ ಚೇಂಬರ್ ಬೆಂಗಳೂರಿನಲ್ಲೇ ಅಂತ್ಯಸಂಸ್ಕಾರ ಮಾಡುವುದಾಗಿ ಹೇಳಿತ್ತು.
ವಿಜಯ್ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದರು. ಕುಟುಂಬದ ಇಚ್ಛೆಯಂತೆ 2 ಕಿಡ್ನಿ, 2 ಕಣ್ಣು, ಯಕೃತ್ತು, ಶ್ವಾಸಕೋಶ, 21 ಹೃದಯದ ಕವಾಟಗಳನ್ನು ದಾನ ಮಾಡಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದವರಿಗೆ ಜೋಡಿಸಲಾಯಿತು. ಇಂದು ಬೆಳಗ್ಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿತ್ತು.