ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ 2 ಕೋಟಿ ದಂಡ ವಿಧಿಸಿದ ನ್ಯಾಯಾಲಯ

1:40 PM, Tuesday, June 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Devegowda ಬೆಂಗಳೂರು  : ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ದೇವೇಗೌಡರಿಗೆ ಹಿನ್ನಡೆಯಾಗಿದೆ. ದೇವೇಗೌಡರು ತಾವು ಮಾಡಿದ್ದ ಆರೋಪವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ಮಾಜಿ ಪ್ರಧಾನಿಗೆ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯವು 2 ಕೋಟಿ ರೂಪಾಯಿ ದಂಡ ವಿಧಿಸಿದೆ.

ದೇವೇಗೌಡರು 2011ರಲ್ಲಿ ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್‌ ಸಂಸ್ಥೆಯ ವಿರುದ್ದ ಆರೋಪ ಮಾಡಿದ್ದರು. ನೈಸ್‌ ಸಂಸ್ಥೆಯು ನೈಸ್‌ ಕಾರಿಡಾರ್ ಯೋಜನೆಯ ಲೋಪಗಳನ್ನು ಬಳಸಿಕೊಂಡು ಅಗತ್ಯಕ್ಕಿಂತ ಹೆಚ್ಚು ಭೂಮಿ ವಶಪಡಿಸಿಕೊಂಡಿದ್ದು ರೈತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದರು.

ಮಾಜಿ ಪ್ರಧಾನಿಯವರ ಹೇಳಿಕೆಯನ್ನು ಆಧರಿಸಿ ದೇವೇಗೌಡರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದ ನೈಸ್‌ ಸಂಸ್ಥೆ, ”ದೇವೇಗೌಡರ ಹೇಳಿಕೆಯಿಂದ ಸಂಸ್ಥೆಯ ಘನತೆಗೆ ಚ್ಯುತಿಯುಂಟಾಗಿದೆ, ಅದಕ್ಕಾಗಿ ರೂ. 10 ಕೋಟಿ ಪರಿಹಾರ ಕೊಡಿಸಬೇಕು” ಎಂದು ಕೇಳಿತ್ತು.

ಮೊಕದ್ದಮೆಯ ವಿಚಾರಣೆ ನಡೆಸಿರುವ ನ್ಯಾಯಾಲಯವು, “ದೇವೇಗೌಡರು ತಾವು ಮಾಡಿದ್ದ ಆರೋಪಗಳನ್ನು ಸಮರ್ಥಿಸಿಕೊಳ್ಳಲು ಅಗತ್ಯವಾದ ಯಾವುದೇ ರೀತಿಯ ದಾಖಲೆಗಳನ್ನು ನೀಡಿಲ್ಲ” ಎಂದು ಹೇಳಿದ್ದು, 2 ಕೋಟಿ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ, ಇನ್ನು ಮುಂದೆ ನೈಸ್‌ ಸಂಸ್ಥೆಯ ವಿರುದ್ದ ಆರೋಪ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು ನೀಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ನೈಸ್ ಕಾರಿಡಾರ್ ಪ್ರಾರಂಭವಾದಾಗಿನಿಂದಲೂ ಅದರ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ. ನೈಸ್ ಸಂಸ್ಥೆ ಮುನ್ನೆಡೆಸುತ್ತಿರುವ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವೇಗೌಡ ಪತ್ರ ಬರೆದಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English