- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಪ್ರಾಪ್ತ ಮಗನನ್ನು ಕಡಿದು ಕೊಲೆಗೈದು, ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ತಂದೆ

Sathwik [1]ಪುಂಜಾಲಕಟ್ಟೆ :  ಬಾಡಿಗೆ ಮನೆಯಲ್ಲಿ ವಾಸವಿದ್ದ ತಂದೆಯೊಬ್ಬ  ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಬುಧವಾರ ನಡೆದಿದೆ.

ಬಾಬು ನಾಯ್ಕ (58) ತನ್ನ ಪುತ್ರ ಸಾತ್ವಿಕ್ (15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.  ಘಟನೆ ವೇಳೆ ಬಾಬು ನಾಯ್ಕನ ಪತ್ನಿ ಸುಗಂಧಿ ಫ್ಯಾಕ್ಟರಿಯೊಂದಕ್ಕೆ ಕೆಲಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಬಾಬು ನಾಯ್ಕ ಕೆಲವು ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಬುಧವಾರ ಮಧ್ಯಾಹ್ನ ಕೂಡಾ ಗಲಾಟೆ ಮಾಡಿದ್ದು ಬಳಿಕ ಮಗ ಸಾತ್ವಿಕ್‌ನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಸುಗಂಧಿ ಅವರು ಫೋನ್ ಮಾಡಿದಾಗ ಸಾತ್ವಿಕ್ ತೆಗೆಯದಿದ್ದಾಗ ಸಂಶಯಗೊಂಡು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಠಾಣಾಧಿಕಾರಿ ಸೌಮ್ಯಾ ಜೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.