[1]ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ ಗ್ರಾಮಗಳ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕುಎಂದರು.
ಪ್ರವಾಹ ಸಂದರ್ಭದಲ್ಲಿ ತುರ್ತು ಸೇವೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ದೀರ್ಘ ರಜೆ ನೀಡಬಾರದು. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಮತ್ತಿತರ ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಚಿಕಿತ್ಸೆಗೆ ಆಗಮಿಸುವ ಜನರಿಗೆ ಔಷಧಿ ಚೀಟಿ ಬರೆದುಕೊಟ್ಟರೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ವರಿಕೆ ನೀಡಿದರು.