ಕಲಿಕಾ ನಿರಂತರತೆ  ಕಾರ್ಯಪಡೆ  ರಚನೆ: ಸುರೇಶ್ ಕುಮಾರ್

6:32 PM, Friday, June 25th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Suresh-Kumarಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಮತ್ತು ಡಾ. ದೇವಿಶೆಟ್ಟಿ ಸಮಿತಿ ವರದಿ ಕುರಿತು ಚರ್ಚಿಸಲು ಶುಕ್ರವಾರ ವಿವಿಧ ಶಿಕ್ಷಣ ತಜ್ಞರು, ಶಿಕ್ಷಣ ಕುರಿತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆಯ ನಂತರ ಮಾತನಾಡಿದ ಅವರು, ಸಭೆಯಲ್ಲಿ ಶಾಲಾರಂಭ ಕುರಿತು ಹಲವಾರು ಅಭಿಪ್ರಾಯಗಳು ವ್ಯಕ್ತವಾಗಿದ್ದು, ಎಲ್ಲ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

ನಾವು ಭೌತಿಕ ತರಗತಿಗಳ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ಆರೋಗ್ಯ ಇಲಾಖೆಯ ಸಲಹೆ ಪಡೆದೇ ಮುಂದುವರೆಯಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.
Suresh-Kumar
ಶಾಲೆಗಳಿಂದ ಮಕ್ಕಳನ್ನು ಬಹುಕಾಲ ದೂರ ಉಳಿಸುವುದು ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಒಳ್ಳೆಯದಲ್ಲ. ಹಾಗೆಯೇ ಯಾವುದೇ ಶಾಲೆಯಿಂದ ಕೋವಿಡ್ ಹರಡಿದ ನಿರ್ದೇಶನ ಗಳಿಲ್ಲವಾದ್ದರಿಂದ ಶಾಲೆಗಳನ್ನು ಸಾಧ್ಯವಾದಷ್ಟು ಬೇಗ ತೆರೆಯಬಹುದು ಮತ್ತು ಶಾಲಾರಂಭವನ್ನು ಆಯಾ ಪ್ರದೇಶವಾರು ಕೋವಿಡ್ ಕನಿಷ್ಠ ಪಾಸಿಟಿವಿಟಿ ಆಧಾರದಲ್ಲಿ ತೆರೆಯಬಹುದೆಂಬ ಡಾ. ದೇವಿಶೆಟ್ಟಿ ವರದಿಯ ಅಂಶಗಳ ಕುರಿತು ಪ್ರಧಾನವಾಗಿಟ್ಟುಕೊಂಡು ಅಭಿಪ್ರಾಯ ವ್ಯಕ್ತಪಡಿಸಿದ ಪ್ರತಿಯೊಬ್ಬ ಪ್ರತಿನಿಧಿಗಳು, ಯಾವುದಾದರೂ ರೂಪದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಪರ್ಕ ಏರ್ಪಡಲೇಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆಂದು ಸಚಿವರು ತಿಳಿಸಿದರು.

ಸ್ಕೂಲ್ ಅನ್‍ಲಾಕ್:
ರಾಜ್ಯದ ವಿವಿಧೆಡೆ ಮಕ್ಕಳು ಬಹುಕಾಲ ಶಾಲೆಯಿಂದ ಹೊರಗುಳಿದಿರುವುದರಿಂದ ಪೋಷಕರು ಮತ್ತು ಮಕ್ಕಳು ಶಾಲೆಗೆ ಬರಲು ಕಾತರರಾಗಿರುವುದು ಸಮೀಕ್ಷೆಯಿಂದ ವ್ಯಕ್ತವಾಗಿದೆ ಎಂದು ಕೆಲ ಸ್ವಯಂಸೇವಾ ಸಂಘಟನೆಗಳ ಪ್ರತಿನಿಧಿಗಳು ಪ್ರತಿಪಾದಿಸಿದರೆ, ಹಲವಾರು ಮಂದಿ ದೇಶದ ವಿವಿಧೆಡೆ ಅನುಸರಿಸಿದ ಕಳೆದ ವರ್ಷ ಪ್ರಾರಂಭಿಸಿದ್ದ ನಮ್ಮ ರಾಜ್ಯದ ಸುಧಾರಿತ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿ ಶಿಕ್ಷಕರು ಮಕ್ಕಳನ್ನು ತಲುಪುವುದು, ಲಾಕ್‍ಡೌನ್ ಅನ್‍ಲಾಕ್ ಮಾಡಿದಂತೆ ವಿಕೇಂದ್ರೀಕರಣ ರೂಪದಲ್ಲಿ ಸ್ಕೂಲ್ ಅನ್‍ಲಾಕ್ ಮಾಡುವ ಕುರಿತೂ ಸಲಹೆಗಳು ವ್ಯಕ್ತವಾಗಿವೆ ಸುರೇಶ್ ಕುಮಾರ್ ಹೇಳಿದರು.

ಶಾಲಾರಂಭದ ವಿಷಯದಲ್ಲಿ ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನೂ ಇಲ್ಲ, ಆದರೆ ಆಯಾ ತಾಲೂಕು, ಗ್ರಾಮಪಂಚಾಯ್ತಿ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ, ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವುದು ಇಲ್ಲವೇ ಇತರೆ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತೂ ಪ್ರತಿನಿಧಿಗಳು ವಿವಿಧ ಸಲಹೆಗಳನ್ನು ನೀಡಿದರಲ್ಲದೇ ಭೌತಿಕವಾಗಿ ಶಾಲೆಗಳನ್ನು ತೆರೆಯುವ ಕುರಿತು ಆಲೋಚಿಸಬೇಕೆಂದೂ ಪ್ರತಿಪಾದಿಸಿದರು ಎಂದು ಸುರೇಶ್ ಕುಮಾರ್ ತಿಳಿಸಿದರು.

ಆನ್-ಲೈನ್ ದೂರದರ್ಶನ ಚಂದನಾ ಮೂಲಕ ಸಂವೇದಾ ಪಾಠಗಳು, ಯೂ-ಟ್ಯೂಬ್, ವಾಟ್-ಸ್‌ಪ್ ಮೂಲಕ ಹಾಗೆಯೇ ಮಕ್ಕಳು ವಾರದಲ್ಲಿ ಒಂದು ದಿನ ಶಾಲೆಗೆ ಬಂದು ಸಿದ್ಧಪಾಠಗಳನ್ನು ತೆಗೆದುಕೊಂಡು ಹೋಗಿ ಇನ್ನೊಂದು ದಿನ ಅವುಗಳೊಂದಿಗೆ ಬಂದು ಸಂಶಯಗಳ ನಿವಾರಣೆಗೆ ಶಿಕ್ಷಕರನ್ನು ಭೇಟಿ ಮಾಡುವಂತಹುದು, ಶಾಲೆಗೆ ಬರಲಾಗದ ಮಕ್ಕಳಿಗೆ ಆಯಾ ಗ್ರಾಮಪಂಚಾಯ್ತಿ ಅಧಿಕಾರಿಗಳ ಇಲ್ಲವೇ ಸ್ವಯಂ ಸೇವಕರ ಮೂಲಕ ಸಿದ್ಧಪಠ್ಯಗಳನ್ನು ನೀಡುವಂತಹ ಸಲಹೆಗಳೂ ವ್ಯಕ್ತವಾದವು. ವಿಶೇಷವಾಗಿ ಡಾ. ದೇವಿಶೆಟ್ಟಿ ವರದಿಯಂತೆ ತರಗತಿವಾರು, ಆಯಾ ಪ್ರದೇಶದ ಪಾಸಿಟಿವಿಟಿ ದರದ ಅನ್ವಯ ಶಾಲಾ ತರಗತಿಗಳನ್ನು ತೆರೆಯುವುದಾಗಲಿ ಇಲ್ಲವೇ ಶಾಲಾವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸುವುದರ ಕುರಿತು ಆದ್ಯತೆ ನೀಡಬೇಕೆಂಬುದು ಬಹುತೇಕರ ಸಲಹೆಯಾಗಿದ್ದು, ಸದ್ಯದಲ್ಲೇ ಟಾಸ್ಕ್‍ಫೋರ್ಸ್ ರಚಿಸಿ ಒಂದು ತೀ‌ರ್ಮಾನಕ್ಕೂ ಬರಲಾಗುವುದು ಎಂದೂ ಸುರೇಶ್ ಕುಮಾರ್ ತಿಳಿಸಿದರು.‌

ಈ ಬಾರಿ ನಿರಂತರ ಮೌಲ್ಯಾಂಕನ:
ಕೋವಿಡ್‍ನಂತಹ ಸಂದರ್ಭದಲ್ಲಿ ಮಕ್ಕಳ ಮೌಲ್ಯಾಂಕನ ಮಾಡಲು ಅನುಕೂಲವಾಗುವಂತೆ ಈ ವರ್ಷದಿಂದ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲೂ ನಿರಂತರ/ ತ್ರೈಮಾಸಿಕ, ಅರ್ಧವಾರ್ಷಿಕ/ ವಾರ್ಷಿಕ ಮೌಲ್ಯಾಂಕನ ಪದ್ಧತಿಯನ್ನೂ ಅಳವಡಿಸಿಕೊಳ್ಳಬೇಕೆಂಬ ಕುರಿತೂ ಚಿಂತನೆ ನಡೆಸಲಾಗಿದ್ದು, ಈ ಕುರಿತಂತೆಯೂ ಕಾರ್ಯಪಡೆ ವರದಿ ನೀಡಲಿದೆ ಎಂದೂ ಸಚಿವರು ವಿವರಿಸಿದರು.

ಮಕ್ಕಳಿಗೆ ಆದಷ್ಟು ಬೇಗ ಪಠ್ಯಪುಸ್ತಕ ಪೂರೈಸಲು ಕ್ರಮ ವಹಿಸುವುದು ಹಾಗೆಯೇ ಮಧ್ಯಾಹ್ನ ಉಪಹಾರ ಸಾಮಗ್ರಿಗಳನ್ನು ಸಮಸ್ಯೆಯಿಲ್ಲದೇ ವಿತರಣೆ ಕುರಿತಂತೆಯೂ ಹೆಚ್ಚಿನ ಗಮನ ಹರಿಸಬೇಕೆಂದು ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

28ರಂದು ಈ ಕುರಿತೂ ಚರ್ಚೆ:
ಸುರಕ್ಷಿತ ವಾತಾವರಣದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧದಲ್ಲಿ ಜೂ. 28ರಂದು ಜಿಲ್ಲಾಧಿಕಾರಿಗಳು, ಸಿಇಒ, ಎಸ್‍ಪಿ, ಡಿಎಚ್‍ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರು ಭಾಗಿಯಾಗಲಿರುವುದರಿಂದ ಈ ವಿಷಯಗಳ ಕುರಿತೂ ಅವರೊಂದಿಗೂ ಚರ್ಚೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಫೌಂಡೇಷನ್‍ನ ಪ್ರಸನ್ನ ಒಡೆಯರ್, ಪ್ರಥಮ್ ಫೌಂಡೇಷನ್‍ನ ಶೇಷಾದ್ರಿ, ಅಜೀಂ ಪ್ರೇಮ್‍ಜೀ ಫೌಂಡೇಷನ್‍ನ ಋಷಿಕೇಶ್, ವರುಣಾ ನಲ್ಲೂರು, ಅಕ್ಷರ ಫೌಂಡೇಷನ್‍ನ ಶ್ರೀಮತಿ ವೈಜಯಂತಿ, ಶಿಕ್ಷಾ ಲೋಕಂನ ಪ್ರಸನ್ನ ಕುಮಾರ್, ನಿವೃತ್ತ ಪ್ರಾಚಾರ್ಯರಾದ ಶ್ರೀಮತಿ ವಿಜಯಕುಮಾರಿ, ಸಾಶಿಇ ಆಯುಕ್ತ ವಿ. ಅನ್ಬು ಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English