[1]ಬೆಂಗಳೂರು : ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಶೀಘ್ರವಾಗಿ ಸರಿಪಡಿಸಬೇಕು, ಸರ್ವರ್ ಮತ್ತು ಒಟಿಪಿ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯ ಸಮಯದಲ್ಲಿ ಸರ್ವರ್ ಮತ್ತು ಒಟಿಪಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಸಮಸ್ಯೆಗಳ ಬಗೆಗೆ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಶಿವರಾಮ್ ಕಾರಂತ್ ಬಡಾವಣೆಯಲ್ಲಿನ ಸರ್ಕಾರಿ ಜಮೀನನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ:
ಶಿವರಾಮ್ ಕಾರಂತ್ ಬಡಾವಣೆಯ ಮಧ್ಯೆ ಇರುವ ಸುಮಾರು 400 ಎಕರೆಗೂ ಹೆಚ್ಚು ಸರ್ಕಾರಿ ಜಮೀನುಗಳನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ ನಡೆಸಿ, ಅದಕ್ಕೆ ಸರಿಯಾದ ರಸ್ತೆ ಸಂಪರ್ಕ ಕಲ್ಪಿಸುವಂತೆ ಕಂದಾಯ ಸಚಿವ ಆರ್ ಅಶೋಕ ಆದೇಶ ನೀಡಿದರು. ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಿದರೆ ಮಾತ್ರ ಬಡಾವಣೆಯ ಅಭಿವೃದ್ಧಿ ಸಾಧ್ಯ, ಆ ಕಾರಣಕ್ಕೆ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕು ಎಂಬುದಾಗಿ ಸೂಚನೆ ನೀಡಿದರು.
ಈ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಶ್ರೀ ಎಸ್ ಆರ್ ವಿಶ್ವನಾಥ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಬಿಡಿಎ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು