[1]ಬೆಂಗಳೂರು : ಕರ್ನಾಟಕ ರಾಜ್ಯದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ `ವೀಕೆಂಡ್ ಕರ್ಫ್ಯೂ’ವನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9ಗಂಟೆಯಿಂದಲೇ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಮಾರ್ಗಸೂಚಿ ಪಾಲಿಸಿ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಪೂಜೆ, ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಆದರೆ, ಜಾತ್ರೆ ಮತ್ತು ಉತ್ಸವಗಳಿಗೆ ಅವಕಾಶವಿಲ್ಲ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 5ಗಂಟೆಯಿಂದ ಮಧ್ಯಾಹ್ನ 2ಗಂಟೆಯ ವರೆಗೆ ಆಹಾರ, ದಿನಸಿ ಸಾಮಗ್ರಿ, ಹಣ್ಣು, ತರಕಾರಿ, ಮೀನು, ಮಾಂಸ, ಡೈರಿ ಉತ್ಪನ್ನಗಳ ಬೂತ್ ಮತ್ತು ಪಶು ಆಹಾರ ಮಾರಾಟ ಮಳಿಗೆಗಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಬೀದಿ ಬದಿಯ ವ್ಯಾಪಾರಕ್ಕೆ ಬೆಳಗ್ಗೆ 5ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ಮಾತ್ರ ಅನುಮತಿಸಲಾಗಿದೆ. ಮದ್ಯ ಖರೀದಿಸಿ ಮನೆಗೆ ಕೊಂಡೊಯ್ಯಲು ಹಾಗೂ ಪಡಿತರ ವಿತರಣೆಗೆ ಮಧ್ಯಾಹ್ನ 2ಗಂಟೆಯ ವರೆಗೆ ಅವಕಾಶ ನೀಡಲಾಗಿದೆ. ಹೊಟೇಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶವಿದೆ.
ಕೇಂದ್ರ ಸರಕಾರಿ ಕಚೇರಿ ಅಧಿಕಾರಿ/ಸಿಬ್ಬಂದಿ ಸಹಿತ ಅಗತ್ಯ ಸೇವೆಗಳ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎಲ್ಲ ಕೈಗಾರಿಕೆ, ಕಂಪೆನಿ ಸಿಬ್ಬಂದಿ ಮತ್ತು ಕಾರ್ಮಿಕರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ವಿಮಾನ ಹಾಗೂ ರೈಲ್ವೆ ನಿಲ್ದಾಣಕ್ಕೆ ರಿಕ್ಷಾ ಮತ್ತು ಟ್ಯಾಕ್ಸಿಗಳಲ್ಲಿ ತೆರಳಬಹುದಾಗಿದೆ. ಆದರೆ, ಪ್ರಯಾಣದ ಟಿಕೆಟ್ ತೋರಿಸಬೇಕು. ಸರಕಾರ ಮತ್ತು ಖಾಸಗಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮದುವೆ ಮತ್ತು ಕುಟುಂಬದ ಸಮಾರಂಭಗಳಲ್ಲಿ 100 ಮಂದಿ ಮಿತಿಯಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ನಡೆಸಲು ಅವಕಾಶ ನೀಡಲಾಗಿದೆ.