[1]ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸೋಮವಾರ ಮಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೂರು ಜಿಲ್ಲೆಯಲ್ಲಿ 2013-14ನೇ ಸಾಲಿನಲ್ಲಿ ಯಾವ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬಹುದು ಎಂಬುದರ ಬಗ್ಗೆ ಪ್ರಾಧಿಕಾರದ ಸದಸ್ಯರ ಜತೆ ಚರ್ಚಿಸಿ ಆ ಬಳಿಕ ನೀಲ ನಕಾಶೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಗುಜರಾತ್ ನಲ್ಲಿ ಗೃಹ ಬಳಕೆಗೆ ಪ್ರತ್ಯೇಕ ವಿದ್ಯುತ್ ಒದಗಿಸುವಂತಹ ಯೋಜನೆ ‘ಜ್ಯೋತಿ ಗ್ರಾಮ’ ಎಂಬುದು ಅಸ್ತಿತ್ವ ದಲ್ಲಿದ್ದು ಅದೇ ಮಾದರಿಯ ಯೋಜನೆಯೊಂದನ್ನು ಕರಾವಳಿಯಲ್ಲಿ ಅನುಷ್ಠಾನಕ್ಕೆ ತರುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಅವರು ಹೇಳಿದರು. ಪ್ರಾಧಿಕಾರ ಹಮ್ಮಿಕೊಂಡಿರುವ ಆಭಿವೃದ್ಧಿ ಯೋಜನೆಗಳಿಗೆ ಇನ್ನಷ್ಟು ವೇಗ ನೀಡಲಾಗುವುದು, ಮತ್ತು ಈ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ರೂಪಿಸಿರುವ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮೀನುಗಾರಿಕೆ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಉಡುಪಿ ಸಂಘ ಚಾಲಕ ಶಂಭು ಶೆಟ್ಟಿ, ಬಾಲಭವನ ಅಧ್ಯಕ್ಷೆ ಸುಲೋಚನಾ ಭಟ್, ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿರಾಜ್, ಸದಸ್ಯರಾದ ರಘುನಾಥ ಹೆಗ್ಡೆ, ರವೀಂದ್ರನಾಥ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ದೇವದಾಸ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.