- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಲಿತ ಬಾಲಕಿಯ ಅತ್ಯಾಚಾರ, ಆರೋಪ ಸಾಬೀತು

judgement [1]ಮಂಗಳೂರು : ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆ ಮಗುವಿಗೆ  ಜನ್ಮ  ನೀಡಲು  ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು.

ಈ ಪ್ರಕರಣ 2015ರ ಫೆಬ್ರವರಿಯಲ್ಲಿ ನಡೆದಿದ್ದು. ಆರೋಪಿ ಅನೇಕ ಬಾರಿ ಬಾಲಕಿ ಮೇಲೆ ಕೃತ್ಯ ಎಸಗಿದ ಪರಿಣಾಮ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಡಿಎನ್‌ಎ ಪರೀಕ್ಷೆ ನಡೆಸಿದಾಗ ಜೇಕಬನೇ ಮಗುವಿನ ತಂದೆ ಎಂದು ದೃಢಪಟ್ಟಿತ್ತು. ಈ ಬಗ್ಗೆ ಎಎಸ್‌ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ 14 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು. ಈ ಮೂಲಕ ಆರೋಪಿ ಮೇಲಿನ ಅಪರಾಧ ಸಾಬೀತಾಗಿರುವುದಾಗಿ ತೀರ್ಪು ನೀಡಿದ್ದಾರೆ.

ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೊಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದರು.