ಸೌಜನ್ಯ ಪ್ರಕರಣದ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ

8:24 PM, Wednesday, November 8th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರ ಅಕ್ಟೋಬರ್ 10ರಂದು ನಡೆದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆಪ್ರಕರಣದಲ್ಲಿದ್ದ ಆರೋಪಿ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಖುಲಾಸೆಗೊಳಿಸಿತ್ತು ಮತ್ತು ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದಕ್ಕಾಗಿ ತನಿಖಾಧಿಕಾರಿ ಮತ್ತು ಪ್ರಾಸಿಕ್ಯೂಷನ್ ಅನ್ನು ತರಾಟೆಗೆ ತೆಗೆದುಕೊಂಡಿತ್ತು. ತನಿಖೆಗೆ ಅಡ್ಡಿಪಡಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿಬಿಐಗೆ ಕೆಳ ನ್ಯಾಯಾಲಯವು 60 ದಿನಗಳ ಕಾಲಾವಕಾಶ ನೀಡಿತ್ತು. ಈಗ ತೀರ್ಪಿನ ನಾಲ್ಕು ತಿಂಗಳ ನಂತರ ಸಿಬಿಐ ಮತ್ತೆ ಮೇಲ್ಮನವಿ ಸಲ್ಲಿಸಿದೆ.

ಪ್ರಕರಣದಲ್ಲಿ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರೇ ನಿಜವಾದ ಅಪರಾಧಿ ಎಂದು ಸಿಬಿಐ ಹೇಳಿಕೊಂಡಿದ್ದು, ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅಗತ್ಯ ಸಾಕ್ಷ್ಯಾಧಾರಗಳನ್ನು ಸಲ್ಲಿಸುವುದಾಗಿ ಸಿಬಿಐ ಹೇಳಿದೆ. ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ನಿಜವಾದ ಆರೋಪಿಗಳನ್ನು ರಕ್ಷಿಸುವಲ್ಲಿ ಬಿಜೆಪಿ ಮುಖಂಡರೊಬ್ಬರ ಕೈವಾಡವಿದೆ, ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ಕುಟುಂಬದವರ ಪಾತ್ರವಿದೆ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡಿತ್ತು.

ಈ ಪ್ರಕರಣದ ಮರುತನಿಖೆ ಹಾಗೂ ನಿಜವಾದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸುತ್ತಿದ್ದಾರೆ. ಧರ್ಮಾಧಿಕಾರಿ ಕುಟುಂಬದ ಬೆಂಬಲಿಗರು ಮತ್ತು ಬಿಜೆಪಿ ರಾಜಕಾರಣಿಗಳು ಸಹ ಬೃಹತ್ ರ್ಯಾಲಿಗಳನ್ನು ನಡೆಸುತ್ತಿದ್ದು, ಇದು ಹಿಂದೂ ಯಾತ್ರಾ ಕೇಂದ್ರದ ಮೇಲಿನ ದಾಳಿ ಎಂದು ಹೇಳುತ್ತಿದ್ದಾರೆ.

ಸೌಜನ್ಯ ಪ್ರಕರಣದ ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಹೈಕೋರ್ಟ್ ಈ ಹಿಂದೆ (ಸೆಪ್ಟಂಬರ್ 9) ತಿರಸ್ಕರಿಸಿತ್ತು ಮತ್ತು ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಒತ್ತಿ ಹೇಳಿತ್ತು. ಆದರೆ, ಸಂತ್ರಸ್ತೆಯ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿರಲಿಲ್ಲ.

ಸೌಜನ್ಯ ಶ್ರೀ ಧರ್ಮಸ್ಥಳ ಮಂಜುನಾಥ ಕಾಲೇಜಿನಲ್ಲಿದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ತರಗತಿಯನ್ನು ಮುಗಿಸಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು ಮತ್ತು ನಂತರ ಆಕೆಯ ಮೃತದೇಹವು ವಿವಸ್ತ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English