ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೊಡಿ ಹಬ್ಬ-ರಥೋತ್ಸವ

6:24 PM, Monday, November 27th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಕುಂದಾಪುರ : ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪುರಾಣ ಪ್ರಸಿದ್ಧ ಧ್ವಜಪುರ (ಕೋಟೇಶ್ವರ)ದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೊಡಿ ಹಬ್ಬ-ರಥೋತ್ಸವ ನ.27 ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಕರಾವಳಿಯ ಪ್ರಥಮ ರಥೋತ್ಸವ ಎಂಬ ಹೆಗ್ಗಳಿಕೆ ಪಡೆದಿರುವ ಕೋಟೇಶ್ವರ ರಥೋತ್ಸವದ ಅಂಗವಾಗಿ ನ.20ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಸೋಮವಾರ ದಿವಾಗಂಟೆ 11-31ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.

ಕೋಟೇಶ್ವರ ರಥೋತ್ಸವದ ಸಂದರ್ಭದಲ್ಲಿ ಗರುಡ ಪ್ರದಕ್ಷಣೆ ಸಹಜ ಪ್ರಕ್ರಿಯೆ. ಎಷ್ಟೋ ಜನ ಭಕ್ತರು ಗರುಡ ಬರುವುದನ್ನೇ ಕಾದಿರುತ್ತಾರೆ. ಇವತ್ತು ಕೂಡಾ ರಥಕ್ಕೆ ಗರುಡ ಪ್ರದಕ್ಷಣೆ ಬಂದಿರುವ ದೃಶ್ಯವನ್ನು ನೋಡಿ ಭಕ್ತರು ಪುಳಕಿತರಾದರು.

ಕೋಟೇಶ್ವರದ ಸುತ್ತುಮುತ್ತಲಿನ ನವವಿವಾಹಿತರು ಬದುಕಿನ ಕುಡಿಯೊಡೆವ ಕ್ಷೇತ್ರವೆಂದೇ ನಂಬುಗೆ ತಳೆದವರಾಗಿ ಕೋಟಿತೀರ್ಥದಲ್ಲಿ ಸ್ನಾನಮಾಡಿ ದೇವರ ದರ್ಶನ ಪಡೆದು ಕಬ್ಬಿನ ಕೊಡಿಯನ್ನು ಒಟ್ಟಿಗೆ ಕೊಂಡೊಯ್ಯುತ್ತಾರೆ.

ಸುಮಾರು ೪ ಎಕರೆ ವಿಸ್ತೀರ್ಣದ ವಿಶಾಲವಾದ ಈ ಕೆರೆಗೆ ಸುತ್ತಕ್ಕಿ ತಳಿದರೆ ತಮ್ಮ ಇಷ್ಟಾರ್ಥ ಈಡೇರುತ್ತದೆ ಎಂಬ ನಂಬಿಕೆಯಿಂದ ಹಬ್ಬದ ದಿನ ಬೆಳಿಗ್ಗೆ 3 ಗಂಟೆಯಿಂದಲೇ ದೂರ ದೂರದ ಹರಕೆ ಹೊತ್ತ ಭಕ್ತಾಭಿಮಾನಿಗಳು ಕೆರೆಯಲ್ಲಿ ತೀರ್ಥ ಸ್ನಾನ ಮಾಡಿ ಮನೆಯಲ್ಲಿಯೇ ಬೆಳೆದ ಅಕ್ಕಿಯನ್ನು ಈ ಕೆರೆಯ ಸುತ್ತ ಹಾಯಿಸಿದ ಬಿಳಿ ಬಟ್ಟೆಯ ಮೇಲೆ ತಳಿಯುತ್ತಾರೆ.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ.ಪ್ರಭಾಕರ ಶೆಟ್ಟಿ, ದೇವಳದ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪ್ರಶಾಂತ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ಎಸ್.ರಾಘವೇಂದ್ರ ರಾವ್ ನೇರಂಬಳ್ಳಿ, ಸುರೇಶ್ ಶೇರೆಗಾರ್ ಬೀಜಾಡಿ, ಚಂದ್ರಿಕಾ ಧನ್ಯ ಕೋಟೇಶ್ವರ, ಶಾರದಾ ಮೂಡುಗೋಪಾಡಿ, ಮಂಜುನಾಥ ಆಚಾರ್ಯ, ಭಾರತಿ, ಹಾಗೂ ಅರ್ಚಕರು, ಸಿಬ್ಬಂದಿ ವರ್ಗ ಹಾಗು ಸಮಸ್ತ ಕೋಟೇಶ್ವರ ಗ್ರಾಮಸ್ಥರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English