ಪತ್ರಕರ್ತರು ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕು : ಶಾಸಕ ವೇದವ್ಯಾಸ್‌ ಕಾಮತ್‌ 

9:12 PM, Friday, January 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪತ್ರಕರ್ತರು ಪ್ರಾಮಾಣಿಕವಾಗಿ ಸುದ್ದಿ ಮಾಡಬೇಕಿದ್ದು, ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ನಡೆಸಬೇಕಾಗಿದೆ. ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕಿದೆ. ಈ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಮಾಜಮುಖಿ ಪತ್ರಿಕೋದ್ಯಮಕ್ಕೆ ದಾರಿ ದೀಪವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದ್ದಾರೆ.

ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರಿನ ಪತ್ರಕರ್ತರು ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಪ್ರತಿ ತಿಂಗಳು ಏನಾದರೂ ಒಂದು ವಿಶೇಷ ಕಾರ್ಯಕ್ರಮ ಮಾಡುತ್ತಲೇ ಇರುತ್ತಾರೆ. ಕರಾವಳಿಯ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು, ಬ್ರ್ಯಾಂಡ್‌ ಮಂಗಳೂರು ಕಾರ್ಯಕ್ರಮ ಮೂಲಕ ಮಂಗಳೂರನ್ನು ರಾಜ್ಯಕ್ಕೆ ಮಾದರಿಯಾಗುವಂತೆ ತೋರಿಸಿಕೊಟ್ಟಿದ್ದಾರೆ. ಮಂಗಳೂರು ಪತ್ರಕರ್ತರ ಸಂಘ ಗುರುತಿಸಿದ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿದ್ದು, ಇದು ಮಂಗಳೂರು ಪತ್ರಕರ್ತರ ಸಾಧನೆ ರಾಷ್ಟ್ರಮಟ್ಟ ತಲುಪಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಪತ್ರಿಕೆಗಳು ಆರ್ಥಿಕವಾಗಿಯೂ ಕುಂದು ಉಂಟು ಆಗದಂತೆ ಕಾರ್ಯನಿರ್ವಹಿಸಬೇಕಾಗಿರುವುದು ಇಂದಿನ ದಿನಗಳಲ್ಲಿ ಬಹು ಮುಖ್ಯ. ಇಲ್ಲಿ ನಡೆಯುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಅತ್ಯಂತ ಯಶಸ್ಸಾಗಲಿ ಎಂದು ಹಾರೈಸುತ್ತೇನೆ ಎಂದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತದೆ. ಬ್ರ್ಯಾಂಡ್‌ ಮಂಗಳೂರು ಸೇರಿದಂತೆ ಪತ್ರಕರ್ತರ ಸಂಘದ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ಸಾಗಿ ಜನಮಾನಸವನ್ನು ತಲುಪುತ್ತಿದೆ. ಈ ಕ್ರೀಡಾಕೂಟ ಉತ್ತಮವಾಗಿ ಯಶಸ್ಸು ಕಾಣಲಿ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ, ಉಪಾಧ್ಯಕ್ಷರಾದ ಪುಂಡಲಿಕ ಬಾಲಾಜಿ, ಅಜ್ಜಮಾಡು ರಮೇಶ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಕಾರ್ಯದರ್ಶಿ ಮತ್ತಿಕೆರೆ ಜಯರಾಮ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಖಜಾಂಗಿ ವಾಸುದೇವ ಹೊಳ್ಳ, ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಬಾಳ ಜಗನ್ನಾಥ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಇದ್ದರು.

ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ. ಬಿ. ಹರೀಶ್ ರೈ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English