ಮಂಗಳೂರು : ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಲಾಗಿದೆ. ಅದನ್ನು ನಿಭಾಯಿಸುವ ಸಾಮರ್ಥ್ಯ ಇಲ್ಲದ ಬಿಜೆಪಿ ಸರಕಾರ ಜನರ ಮೇಲೆ ಜಿಎಸ್ಟಿ ರೂಪದಲ್ಲಿ ಹೊರೆ ಹಾಕುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಕಿ, ಗೋಧಿ, ಬೆಲ್ಲ, ಜೇನುತುಪ್ಪ, ಪೆನ್ಸಿಲ್ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹಾಕುವ ಮೂಲಕ ಬಿಜೆಪಿ ಸರಕಾರ ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ ಯತ್ನ ನಡೆಸುತ್ತಿದೆ. ಸರಕಾರ ನಡೆಸಲು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾನವೀಯತೆ, ಕುರಣೆ ಇಲ್ಲದ ಸರಕಾರ ಇನ್ನು ಶವವನ್ನು ಹೊತ್ತು ಕೊಂಡು ಹೋಗುವುದಕ್ಕೂ ತೆರಿಗೆ ಹಾಕದಿದ್ದರೆ ಸಾಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಡುಗೆ ಅನಿಲಕ್ಕೆ 400 ರೂ.ಗಳಿದ್ದಾಗ ಸಬ್ಸಿಡಿ ದೊರೆಯುತ್ತಿತ್ತು. ಈಗ 1000 ರೂ. ಮೀರಿದರೂ ಸಬ್ಸಿಡಿ ದೊರೆಯುತ್ತಿಲ್ಲ. ಸರಕಾರ ಏನು ಮಾಡುತ್ತಿದೆ ಎಂದು ಜನರಿಗೆ ಅರ್ಥವಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವದಲ್ಲಿ ಯಾವುದೇ ಅನ್ಯಾಯ ಆದಾಗ ಪ್ರತಿಪಕ್ಷ ಧ್ವನಿ ಎತ್ತಬೇಕಾಗುತ್ತದೆ. ಆದರೆ ಪ್ರಸಕ್ತ ಬಿಜೆಪಿ ಆಡಳಿತದ ಸರಕಾರದಲ್ಲಿ ಪ್ರತಿಪಕ್ಷದ ಧ್ವನಿಯನ್ನು ದಮನ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅಭಯಚಂದ್ರ ಜೈನ್, ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಮಿಥುನ ರೈ, ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ಸುಭಾಷ್, ಪದ್ಮನಾಭ ನರಿಂಗಾನ, ಮೋನಪ್ಪ ಪೂಜಾರಿ, ಪದ್ಮನಾಭ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English