[1]ಪುತ್ತೂರು : ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಅವರ ಸಮ್ಮುಖ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು ಆ ಮೂಲಕ ಇದುವರೆಗೂ ಇದ್ದ ರಾಜಕೀಯ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
ಯಾವುದೇ ಶರತ್ತು ಅಥವಾ ಬೇಡಿಕೆಯನ್ನು ಇರಿಸಿದೆ ಕಾಂಗ್ರೆಸ್ ಪಕ್ಷ ಸೇರಿದ್ದಾಗಿ ತಿಳಿಸಿದ್ದಾರೆ. ಮತ್ತು ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ಅವರು ಹೇಳಿದರು.ಕೆಲವು ದಿನಗಳ ಹಿಂದೆ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಶಕುಂತಳಾ ನಿವಾಸಕ್ಕೆ ಭೇಟಿ ನೀಡಿ ತಮ್ಮ ಪಕ್ಷಕ್ಕೆ ಸ್ವಾಗತಿಸಿದರೂ ಆ ಪಕ್ಷಕ್ಕೆ ಸೇರದ ಶಕುಂತಲಾ ಶೆಟ್ಟಿ ಯವರು ಪ್ರಸ್ತುತ ಮಾಜಿ ಸಂಸದ ವಿನಯ ಕುಮಾರ ಸೊರಕೆ ಯವರ ಪೌರೋಹಿತ್ಯ ದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಶಕುಂತಳಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುತ್ತೂರಿನಿಂದ ಈ ಬಾರಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ಧಿ ಕೆಲವು ತಿಂಗಳಿನಿಂದ ಚಾಲ್ತಿಯಲ್ಲಿತ್ತು. ಆದರೆ ಶಕುಂತಳಾ ಕಾಂಗ್ರೆಸ್ ಅಭ್ಯರ್ಥಿಯಾಗುವುದನ್ನು ಸ್ಥಳೀಯ ಕಾಂಗ್ರೆಸಿಗರು ವಿರೋಧಿಸಿ ಪಕ್ಷದಲ್ಲಿ ಕೆಲಸ ಮಾಡಿದವರಿಗೆ ಟಿಕೆಟ್ ಕೊಡಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ ಸ್ಥಳೀಯ ಘಟಕ ಅಥವಾ ಕಾಂಗ್ರೆಸ್ ಜಿಲ್ಲಾ ಘಟಕಗಳನ್ನು ಸಂಪರ್ಕಿಸದೆ ಶಕುಂತಳಾ ಶೆಟ್ಟಿ ನೇರ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಸಾಮರ್ಥ್ಯವನ್ನು ತೋರ್ಪಡಿಸಿದ್ದಾರೆ. ಈ ಮೂಲಕ ಶಕುಂತಳಾ ಶೆಟ್ಟಿ ಯಾವ ಪಕ್ಷ ಸೇರಲಿದ್ದಾರೆ ಎಂಬ ರಾಜಕೀಯ ಪ್ರಶ್ನೆಗೆ ಉತ್ತರ ದೊರೆತಿದೆ.