ಕೊಲ್ಕತ್ತಾ : ಬುಧವಾರ ಕೇಂದ್ರ ಕೊಲ್ಕತ್ತಾ ದ ಸೀಲ್ಡಾ ಪ್ರದೇಶದಲ್ಲಿ ಗೋದಾಮು ಮತ್ತು ಕಚೇರಿ ಸಂಕೀರ್ಣಗಳಿರುವ ಮಾರುಕಟ್ಟೆಯಲ್ಲಿ ನಸುಕಿನ ಜಾವ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು 19 ಜನರು ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ 26 ತಂಡಗಳು ಸತತವಾಗಿ ಮೂರು ಗಂಟೆಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ಶಮನಗೊಳಿಸಲು ಪ್ರಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಈ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಮೃತರಲ್ಲಿ ಅನೇಕರು ಈ ವೇಳೆ ನಿದ್ದೆಯಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಎನ್ಆರ್ಎಸ್ ಮತ್ತು ಮೆಡಿಕಲ್ ಕಾಲೇಜ್ ಆಸ್ಪತ್ರೆಗಳಿಗೆ ತಕ್ಷಣವೇ ದಾಖಲಿಸಲಾಗಿದ್ದು, ಬೆಂಕಿ ದುರಂತಕ್ಕೆ ನಿರ್ದಿಷ್ಟ ಕಾರಣಗಳು ತಿಳಿದುಬಂದಿಲ್ಲವಾದರೂ, ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ದುರಂತ ಸಂಭವಿಸದಂತೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರದಿದ್ದುದೇ ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಸುದ್ಧಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಅವರು ಘಟನೆ ಕುರಿತಂತೆ ತನಿಖೆಗೆ ಆದೇಶಿಸಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. `ಘಟನೆ ಕುರಿತು ಪೊಲೀಸ್, ಅಗ್ನಿಶಾಮಕ ಇಲಾಖೆ ಹಾಗೂ ಪುರಸಭೆ ಜಂಟಿಯಾಗಿ ತನಿಖೆ ನಡೆಸಿ ಮೂರು ದಿನಗಳ ಒಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮಮತಾ ಅವರು ತಿಳಿಸಿದರು.
Click this button or press Ctrl+G to toggle between Kannada and English