ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಮೂರು ವರ್ಷಗಳಲ್ಲಿ ಜನರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಹೊರಿಸುತ್ತಾ ಬಂದಿದೆ. ತನ್ನ ಹಣಕಾಸು ನಿರ್ವಹಣೆಯ ವೈಫಲ್ಯ ಹಾಗೂ ಅಧಿಕಾರ ದಾಹವನ್ನು ಮುಚ್ಚಿಕೊಳ್ಳಲು ಈಗ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ದಿನಬಳಕೆಯ ವಸ್ತುಗಳಿಂದ ಹಿಡಿದು ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಿರುವ ಕಾಂಗ್ರೆಸ್, ಯಾವ ನೈತಿಕತೆಯಿಂದ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ ಎಂದು ಕಾರ್ಕಳದ ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಕೈಗಾರಿಕಾ ವಿದ್ಯುತ್ ದರ ಏರಿಕೆಯಿಂದ ಉದ್ದಿಮೆಗಳು ಮುಚ್ಚುವ ಹಂತ ತಲುಪಿದ್ದರೆ, ಅಬಕಾರಿ ಸುಂಕ, ಆಸ್ತಿ ನೋಂದಣಿ ಶುಲ್ಕ ಆರು ಪಟ್ಟು ಹೆಚ್ಚಳವಾಗಿದೆ. ಜನನ-ಮರಣ ಪ್ರಮಾಣ ಪತ್ರದ ದರವನ್ನೂ ಬಿಡದ ಸರ್ಕಾರ, ವೃದ್ಧಾಪ್ಯ ವೇತನ ನೀಡದೆ ಜನರಿಗೆ ಅನ್ಯಾಯವೆಸಗುತ್ತಿದೆ. ಇಷ್ಟೆಲ್ಲಾ ಬೆಲೆ ಏರಿಕೆಗಳನ್ನು ರಾಜ್ಯ ಸರ್ಕಾರ ಯಾವ ಬಿಕ್ಕಟ್ಟಿನ ಕಾರಣಕ್ಕಾಗಿ ಮಾಡಿದೆ ಎಂಬ ಪಟ್ಟಿಯನ್ನು ಕಾಂಗ್ರೆಸ್ ಮೊದಲು ಜನರ ಮುಂದಿಡಲಿ ಎಂದು ಅವರು ಆಗ್ರಹಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರುಪೇರಾಗಿದ್ದು, ಇದು ಇಡೀ ವಿಶ್ವವನ್ನೇ ಕಾಡುತ್ತಿರುವ ಸಮಸ್ಯೆಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಪ್ರಧಾನಿ ನರೇಂದ್ರ ಮೋದಿಯವರು ಆಡಳಿತಾತ್ಮಕ ಜಾಣ್ಮೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಜಾಗತಿಕ ಸಂಕಷ್ಟದ ಸಮಯದಲ್ಲಿ ದೇಶ ಒಗ್ಗಟ್ಟಾಗಿ ನಿಲ್ಲುವುದನ್ನು ಬಿಟ್ಟು, ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









