[1]ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಅಲ್ಲ, ಈ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಮುಂದಿನ ಚುನಾವಣಾ ಫಲಿತಾಂಶ ವಾಗುವ ಸಾಧ್ಯತೆ ತೀರ ಕಡಿಮೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.
ಅವರು ರವಿವಾರ ಸುದ್ದಿಗಾರರ ಜತೆಗೆ ಸ್ಥಳೀಯ ಚುನಾವಣಾ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ನಡೆದ ಚುನಾವಣಾ ಫಲಿತಾಂಶವನ್ನು ಗಮನಿಸಿದಾಗ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದರೆ, ಅನಂತರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ದಿಲ್ಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿತ್ತು. ಆದ್ದರಿಂದ ಚುನಾವಣೆಯಲ್ಲಿ ಒಂದೇ ಫಲಿತಾಂಶವನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಹೇಳಿದರು.
ಯಡಿಯೂರಪ್ಪ ನವರ ಕೆಜೆಪಿ ಪಕ್ಷ ದಿಂದಾಗಿ ಬಿಜೆಪಿ ಗೆ ಯಾವುದೇ ಹಿನ್ನಡೆಯಾಗಿಲ್ಲ ಆದರೆ, ನಮ್ಮ ಕೆಲವು ಸೀಟುಗಳು ಅವರ ಪಾಲಾಗಿವೆ ಅಷ್ಟೇ, ಆದರೆ, ಇವೆಲ್ಲದಕ್ಕೂ ಮತದಾರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾನೆ ಎಂದು ಅವರು ಹೇಳಿದರು.