ಬೆಂಗಳೂರು: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪ್ಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ.
ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ. ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು..
ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ. ಆತ ಬೆಳ್ತಂಗಡಿ ಪೊಲೀಸರಿಗೆ ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ತಾನೂ ಮಾಡಿದ ಪಾಪದ ಕೃತ್ಯಗಳನ್ನು ಉಲ್ಲೇಖಿಸಿದ್ದ.
1995ರಿಂದ 2014ರ ವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದ್ದರು. ನಾನು ಜೀವಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ. ಪೊಲೀಸರಿಗೆ ಶವ ವಿಲೇವಾರಿ ಮಾಡಿದ್ದ ವ್ಯಕ್ತಿ ದೂರು ನೀಡಿದ್ದ. ಬೆಳ್ತಂಗಡಿ ನ್ಯಾಯಾಲಯದಲ್ಲೂ ಈ ಸಂಬಂಧ ಹೇಳಿಕೆ ದಾಖಲಿಸಿದ್ದ.
ಎಲ್ಲೆಡೆ ಶವ ಹೂತಿಟ್ಟ ವಿಚಾರವೇ ತೀವ್ರ ಚರ್ಚೆಗೆ ಗ್ರಾಸವಾಯ್ತು. ಕೆಲ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರು ಕೂಡ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಕೆಲವರು ಮುಖ್ಯಮಂತ್ರಿಗಳನ್ನ ಖುದ್ದು ಭೇಟಿ ಮಾಡಿ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಎಸ್ಐಟಿ ರಚಿಸಿದೆ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಜ್ಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









