ಬಂಟ್ವಾಳ : ಸಜೀಪಮನ್ನೂರು ಗಣೇಶೋತ್ಸವದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು 10 ಗಂಟೆಗೆ ಮೊದಲೇ ಪೊಲೀಸರು ನಿಲ್ಲಿಸಿದಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ ಶಬ್ದ ನಿಯಮಗಳನ್ನು ಉಲ್ಲೇಖಿಸಿ, ಪೊಲೀಸರು ಮಧ್ಯಪ್ರವೇಶಿಸಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು ಎನ್ನಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನ ಸಮೀಪದ ಸಜಿಪ ಮುನ್ನೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದೆ. ಮತ್ತೊಂದು ಕಡೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿಗಳು ಹೇಳುತ್ತಾರೆ, ಅದೇ ಸಾಂಸ್ಕೃತಿಕ ನಗರಿಯ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಉದ್ಯಮಿ ದಂಪತಿಗಳ ರೀಲ್ಸ್ ಮಾಡಲು ಅವಕಾಶ ಮಾಡಿಕೊಟ್ಟು ಸಾಂಸ್ಕೃತಿಕ ನಗರಿಯ ಘನತೆಯನ್ನು ಕುಗ್ಗಿಸುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಸಂಸ್ಕೃತಿಯನ್ನು ಅವಮಾನಿಸುವುದು ಸರ್ಕಾರದ ಒಂದು ಭಾಗವಾಗಿದೆ.
ಗಣೇಶೋತ್ಸವದ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಬೇಕು ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ಚರ್ಚೆಯಾಗಿ ಸರ್ಕಾರ ಸಮ್ಮತಿಯನ್ನೂ ವ್ಯಕ್ತಪಡಿಸಿದೆ. ಆದಾಗ್ಯೂ ಪೊಲೀಸರು ಗಣೇಶೋತ್ಸವದ ಮೇಲೆ ಕೆಂಗಣ್ಣು ಬೀರುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









