ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ 70 ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು.
ಧ್ವಜಾರೋಹಣ ನೆರವೇರಿಸಿ ಬಳಿಕ ಪರೇಡ್ ವೀಕ್ಷಣೆ ಮಾಡಿದ ಉಸ್ತುವಾರಿ ಸಚಿವರು ರಾಜ್ಯೋತ್ಸವ ಸಂದೇಶ ನೀಡಿದರು.
ಕನ್ನಡ ರಾಜ್ಯೋತ್ಸವದ ಈ ಸಮಾರಂಭದಲ್ಲಿ ಭಾಗವಹಿಸಿರುವ ಲೋಕಸಭಾ ಸದಸ್ಯರೇ, ವಿಧಾನಸಭಾ ಸದಸ್ಯರೇ, ವಿಧಾನ ಪರಿಷತ್ತಿನ ಸದಸ್ಯರೇ, ಜನಪ್ರತಿನಿಧಿಗಳೆ, ಅಧಿಕಾರಿ ವರ್ಗದವರೇ, ಶಾಲಾ ವಿದ್ಯಾರ್ಥಿಗಳೇ, ಕನ್ನಡಾಭಿಮಾನಿಗಳೇ, ಮಾಧ್ಯಮದ ಸ್ನೇಹಿತರೆ ಹಾಗೂ ಜಿಲ್ಲೆಯ ಸಮಸ್ತ ಬಂಧುಗಳೇ ತಮಗೆಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು,

“ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು” ಎಂದು ಹುಯಿಲಗೋಳ ನಾರಾಯಣರಾಯರು ಬರೆದ ಕವಿತೆಯ ಸಾಲುಗಳನ್ನು ನಾವು ನೆನಪಿಸಿಕೊಳ್ಳಬಹುದು. ಏಕೆಂದರೆ ಕರ್ನಾಟಕ ರಾಜ್ಯವು ಏಕೀಕರಣವಾಗಿ 69 ವರ್ಷಗಳು ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ನಾವಿದ್ದೇವೆ. ಎಲ್ಲರ ಬದುಕಿನಲ್ಲೂ ಸುಖಶಾಂತಿ, ನೆಮ್ಮದಿ ನೆಲೆಸುವಂತಾಗಲಿ ಎಂದು ಈ ಸಂದರ್ಭದಲ್ಲಿ ನಾನು ಪ್ರಾರ್ಥಿಸುತ್ತೇನೆ.
ಪ್ರಾಕೃತಿಕವಾಗಿ ಶ್ರೀಮಂತವಾದ ಕರ್ನಾಟಕ ರಾಜ್ಯದಲ್ಲಿ ಜನಿಸಿದ ನಾವೆಲ್ಲರೂ ಭಾಗ್ಯಶಾಲಿಗಳಾಗಿದ್ದೇವೆ. ಬ್ರಿಟಿಷರ ಅಧಿಕಾರದ ಅವಧಿಯಲ್ಲಿ ಮೈಸೂರು, ಮುಂಬೈ, ಹೈದರಾಬಾದ್, ಮದ್ರಾಸ್ ಸಂಸ್ಥಾನಗಳಲ್ಲಿ ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟ ನಡೆಸಿದ ಪ್ರತಿಫಲವಾಗಿ 1956ರ ನವೆಂಬರ್ 1ರಂದು ನಮ್ಮ ರಾಜ್ಯ ಉದಯವಾಯಿತು. ಇದಕ್ಕಾಗಿ ಹೋರಾಡಿದ ಅನೇಕ ಮಹನೀಯರನ್ನು ಸಾಹಿತಿಗಳನ್ನು ಸಂಘ ಸಂಸ್ಥೆಗಳನ್ನು ಗೌರವಪೂರ್ವಕವಾಗಿ ಸ್ಮರಿಸುತ್ತೇನೆ.

ಕನ್ನಡನಾಡಿನ ಇತಿಹಾಸ, ಪರಂಪರೆ, ಸಾಂಸ್ಕೃತಿಕ ಹಿರಿಮೆ ತುಂಬಾ ವೈಶಿಷ್ಟ್ಯತೆಗಳಿಂದ ಕೂಡಿದೆ. ಅನೇಕ ಸುಪ್ರಸಿದ್ದ ರಾಜಮನೆತನದವರು, ಧೀರರು ಈ ನಾಡಿನಲ್ಲಿ ಆಳ್ವಿಕೆ ನಡೆಸಿ ಅನೇಕ ಅಮೂಲ್ಯ ಮತ್ತು ಜನಪರವಾದ ಕೊಡುಗೆಗಳನ್ನು ರಾಜ್ಯಕ್ಕೆ ನೀಡಿರುತ್ತಾರೆ. ಇವರು ತಮ್ಮ ಆಡಳಿತದ ಕಾಲದಲ್ಲಿ ಕನ್ನಡನಾಡು-ನುಡಿಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದಿದ್ದು ಅವರೆಲ್ಲರ ಕೊಡುಗೆಯನ್ನು
ಸ್ಮರಿಸುತ್ತೇನೆ.
ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಗೌರವಿಸಬೇಕು ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರೂ ಪ್ರತಿಪಾದಿಸಿದ್ದರು ಎಂಬುದನ್ನು ನಾವು ಮನಗಾಣಬೇಕಿದೆ. ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು ಹಲವು ಧರ್ಮ, ಜನಾಂಗ ಮತ್ತು ರೈತರ ಕಾಯಕ ಭೂಮಿಯಾಗಿದೆ. ಕರ್ನಾಟಕದಲ್ಲಿ ವೈವಿಧ್ಯಮಯವಾದ ಸಂಸ್ಕೃತಿ, ಜೀವನಪದ್ಧತಿ ನೆಲೆಸಿದೆ. ಭಾವೈಕ್ಯತೆಯ ಸ್ವರ್ಗವಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಸರ್ವಧರ್ಮಗಳ ಸಮನ್ವಯತೆ, ಸೌಹಾರ್ದತೆ ಇಲ್ಲಿ ಮನೆಮಾಡಿವೆ.
ದೇಶಕ್ಕೆ ನಮ್ಮ ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ಹೆಮ್ಮೆಯ ವಿಷಯ. ಕನ್ನಡದ ಜಾನಪದ ಕಲೆಯೂ ಶ್ರೀಮಂತವಾಗಿದೆ. ಗ್ರಾಮೀಣ ಭಾಗದ ಜನಸಮುದಾಯದಿಂದಲೇ ಈ ಜನಪದ ಕಲೆ ಗಟ್ಟಿಯಾಗಿ ಬೇರೂರಿದೆ ಎಂಬುದು ವಿಶೇಷ ಸಂಗತಿಯಾಗಿದೆ.

ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯು ಹಿಂದುಳಿಯದಂತೆ ಸರಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಮೊಬೈಲ್ನಲ್ಲಿ ಕನ್ನಡ ಬಳಕೆ, ಬೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶಗಳನ್ನು ಅಭಿವೃದ್ಧಿಪಡಿಸಿ, ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡಲಾಗಿದೆ. ಕನ್ನಡಕ್ಕೆ ಸಂಬ ಂಧಿಸಿದ ಹಲವಾರು ಸಾಫ್ಟ್ ವೇರ್ಗಳು ಇಂದು ಅಸ್ತಿತ್ವದಲ್ಲಿವೆ. ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ.
ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು.
ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರಾಗಲಿ, ಕರ್ನಾಟಕದಲ್ಲಿ ಇರುವವರೆಲ್ಲರೂ ಕನ್ನಡಿಗರೇ, ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ.
ಒಂದು ರಾಷ್ಟ್ರದ ಶ್ರೀಮಂತಿಕೆಯನ್ನು ಅಳೆಯಲು ಕೇವಲ ಜಿ.ಡಿ.ಪಿ. ಯೊಂದೇ ಮಾನದಂಡವಾಗಬಾರದು, ಆ ದೇಶದಲ್ಲಿನ ಕಲೆ, ಸಾಹಿತ್ಯ, ಸಂಸ್ಕೃತಿ ಎಷ್ಟೊಂದು ಗಟ್ಟಿಯಾಗಿದೆ ಎಂಬ ಆಧಾರದ ಮೇಲೆ ಆ ದೇಶ ಎಷ್ಟು ಶ್ರೀಮಂತವಾಗಿದೆ ಎಂದು ಗಮನಿಸುವಂತಾದರೆ ಅದು ಅರ್ಥಪೂರ್ಣವಾಗುತ್ತದೆ.
ನಮ್ಮ ರಾಷ್ಟ್ರವು ಸಂಸ್ಕೃತಿ ಮತ್ತು ಕಲೆಗಳಲ್ಲಿ ಇಡೀ ವಿಶ್ವಕ್ಕೇ ಮಾದರಿಯಾಗಿದೆ. ಆದ್ದರಿಂದ ನಮ್ಮ ಬದುಕಿನಲ್ಲಿ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡರೆ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮಹತ್ವ ಸಿಗುವುದು ಸಾಧ್ಯ ನಮ್ಮಲ್ಲಿ ಉತ್ತಮ ಸಂಸ್ಕೃತಿಯ ಬಂಧ ಗಟ್ಟಿಯಾಗಿರುವುದರಿಂದಲೇ ಮಾನವೀಯ ಸಂಬಂಧಗಳೂ ಅತ್ಯಂತ ಜೀವಂತವಾಗಿವೆ, ಇದು ಸುಖೀ ಕುಟುಂಬಕ್ಕೆ ಅಗತ್ಯವಾದ ಅಂಶವಾಗಿದೆ.
ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ನಾವು ಪಾಲಕರು ಗಮನಹರಿಸಬೇಕು.
ಕನ್ನಡವನ್ನು ಹೆಚ್ಚೆಚ್ಚು ಜನರು ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಜತನದಿಂದ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ನುಡಿ ಗಡಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ಸಂರಕ್ಷಣೆಗೆ ಸರಕಾರ ಬದ್ಧವಾಗಿದೆ. ಜನಪದ, ಸಂಸ್ಕೃತಿ, ಸಾಹಿತ್ಯ ರಂಗಭೂಮಿ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳಿಗೆ ಹೆಚ್ಚು ಅನುದಾನ ನೀಡಲಾಗುತ್ತಿದೆ. ರಾಜ್ಯದ ಸಮೃದ್ಧ ಪ್ರಾಚೀನ ಸ್ಮಾರಕಗಳ ಮತ್ತು ಪರಂಪರೆಯ ಸಂಪತ್ತನ್ನು ರಕ್ಷಿಸಲು ಕಾರ್ಯಪ್ರವೃತ್ತರಾಗಿದ್ದೇವೆ.
ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುವುದೇ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು ಅನೇಕ ಜನಪರ ಕಾರ್ಯಕ್ರಮಗಳನ್ನು ಘೋಷಿಸಿ ಜಾರಿಗೆ ತರಲಾಗಿದೆ.
ಏಕೀಕೃತ ಕರ್ನಾಟಕ ರಾಜ್ಯ ಉದಯವಾಗಿನಿಂದಲೂ ಕೇಳಿಬರುತ್ತಿದ್ದ ಪ್ರಾದೇಶಿಕ ಅಸಮತೋಲನದ ಕೂಗನ್ನು ನಿವಾರಿಸಲು ನಾವು ಸಾಕಷ್ಟು ಶ್ರಮವಹಿಸುತ್ತಿದ್ದೇವೆ.
ಆಡಳಿತವನ್ನು ಜನಸಾಮಾನ್ಯರತ್ತ ಕೊಂಡೊಯ್ದು ಅವರಲ್ಲಿ ಸಂತೃಪ್ತಿಯನ್ನು ಮೂಡಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಪರಿಶಿಷ್ಠ ಜನಾಂಗ, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ವಿಶೇಷವಾಗಿ ದುರ್ಬಲರು ಮತ್ತು ಕೃಷಿ ಕಾರ್ಮಿಕರ ಕಲ್ಯಾಣಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು ಪ್ರತಿಯೊಬ್ಬರಲ್ಲಿಯೂ ಹರುಷವನ್ನು ತಂದಿದೆ. ರಾಜ್ಯದ ಬಹುತೇಕ ಜನರು ಇಂದು ಸರಕಾರದ ಒಂದಿಲ್ಲೊ ಂದು ಯೋಜನೆಯಲ್ಲಿ ನೇರ ಫಲಾನುಭವಿಗಳಾಗಿ ಪ್ರಯೋಜನ ಪಡೆಯುತ್ತಿದ್ದಾರೆ.
ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸುಖೀ ರಾಜ್ಯ ನಿರ್ಮಿಸುವತ್ತ ದಿಟ್ಟ ಹೆಜ್ಜೆಗಳನ್ನಿಟ್ಟಿದ್ದೇವೆ. ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ಈ ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅತ್ಯಂತ ಸರಳವಾದ ಪ್ರಕ್ರಿಯೆಯು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ. ಆ ಮೂಲಕ ಜನಸಾಮಾನ್ಯರ ಮನೆಬಾಗಿಲಿಗೆ ಗ್ಯಾರಂಟಿ ಯೋಜನೆಗಳು ಸರಾಗವಾಗಿ ತಲುಪಿವೆ. ಆರ್ಥಿಕ ಸಶಕ್ತತೆ ಮತ್ತು ಮಹಿಳಾ ಸಬಲೀಕರಣದ ಮೂಲಕ ರಾಜ್ಯದ ಜನರು ನೆಮ್ಮದಿ, ಘನತೆ ಮತ್ತು ಗೌರವದಿಂದ ಜೀವನ ಸಾಗಿಸುತ್ತಿರುವುದು ಪ್ರಚಲಿತ ಜಗತ್ತಿನ ಮಹತ್ತರ ವಿದ್ಯಮಾನವಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ದಕ್ಷಣ ಕನ್ನಡ ಜಿಲ್ಲೆಯಲ್ಲಿ 5.51 ಲಕ್ಷ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದು ಇದುವರೆಗೆ ರೂ. 789 ಕೋಟಿ ರೂಪಾಯಿ ಮೊತ್ತವನ್ನು ರಾಜ್ಯ ಸರಕಾರವು ಪಾವತಿಸಿದೆ.
ಶಕ್ತಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ 11.01 ಕೋಟಿ ಮಹಿಳಾ ಪ್ರಯಾಣಿಕರು ಸದುಪಯೋಗವನ್ನು ಪಡೆದುಕೊಂಡಿದ್ದು, ಒಟ್ಟು ಪ್ರಯಾಣ ವೆಚ್ಚ ರೂ. 373.81 ಕೋಟಿ ರೂ.ಗಳಾಗಿರುತ್ತದೆ.
ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ.2000 ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3.79 ಲಕ್ಷ ಮಹಿಳೆಯರಿಗೆ ಇದುವರೆಗೆ ಒಟ್ಟು ರೂ.1377 ಕೋಟಿ ಸಹಾಯಧನ ಮಂಜೂರಾಗಿರುತ್ತದೆ.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ 11.76 ಲಕ್ಷ ಮಂದಿ ಫಲಾನುಭವಿಗಳಿಗೆ, ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆ.ಜಿ.ಯಂತೆ ಉಚಿತವಾಗಿ ಅಕ್ಕಿಯನ್ನು ನೀಡಲಾಗುತ್ತಿದೆ.
ಯುವನಿಧಿ ಯೋಜನೆಯಡಿ 5283 ಯುವಕ ಯುವತಿಯರಿಗೆ ರೂ. 9.54 ಕೋಟಿ ರೂ. ಮೊತ್ತದ ಆರ್ಥಿಕ ನೆರವು ನೀಡುವ ಮೂಲಕ ಅವರ ಕಷ್ಟಕಾಲದಲ್ಲಿ ಕೈಹಿಡಿದು ನೆರವು ನೀಡಿದ ತೃಪ್ತಿ ನಮಗಿದೆ.
ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಹಂತ-4 ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು ರೂ. 110 ಕೋಟಿ ಮಂಜೂರಾಗಿದ್ದು ಈ ಪೈಕಿ 144 ಕಾಮಗಾರಿಗಳು ಪೂರ್ಣಗೊಂಡಿವೆ. ಬಡಜನರಿಗೆ ಅಗ್ಗದ ದರದಲ್ಲಿ ಉಪಹಾರ ಒದಗಿಸುವ ಮಹತ್ವಾಕಾಂಕ್ಷೆ ಇಂದಿರಾ ಕ್ಯಾಂಟೀನ್ ಯೋಜನೆಯಡಿ ಜಿಲ್ಲೆಯಲ್ಲಿ 19 ಕ್ಯಾಂಟೀನ್ಗಳು ಮಂಜೂರಾಗಿವೆ. ಸ್ಥಳೀಯರ ಅವಶ್ಯಕತೆಗೆ ಅನುಗುಣವಾಗಿ ಹೊಸ ಮೆನುವಿನಂತೆ ಆಹಾರ ಸರಬರಾಜು ಮಾಡಲಾಗುತ್ತಿದೆ, ಹೊಸದಾಗಿ ಇನ್ನೂ 7 ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಪ್ರಕ್ರಿಯೆ ನಡೆಯುತ್ತಿದೆ.
ಬಡಕುಟುಂಬಗಳಿಗೆ ಮನೆ ಒದಗಿಸುವ ಯೋಜನೆಯಲ್ಲಿ ಸ್ವಂತ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲು ಈವರೆಗೆ ಜಿಲ್ಲೆಯ ಪಟ್ಟಣ ಪ್ರದೇಶಗಳಲ್ಲಿ 3541 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ 2969 ಮನೆಗಳು ಪೂರ್ಣಗೊಂಡಿವೆ. ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ಇಡ್ಯಾದಲ್ಲಿ ಜಿ+3 ಮಾದರಿಯ ಗುಂಪುಮನೆ ಯೋಜನೆಯಲ್ಲಿ 792 ಫಲಾನುಭವಿಗಳನ್ನು ಆಯ್ಕೆ
ಮಾಡಲಾಗಿದ್ದು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ.
ಸೋಮೇಶ್ವರ, ಬಜಪೆ, ಕಿನ್ನಿಗೋಳಿ, ಮೂಲ್ಕಿ ಮತ್ತು ಮೂಡಬಿದ್ರೆ ಪಟ್ಟಣಗಳಿಗೆ ನೀರು ಸರಬರಾಜು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಯೋಜನೆಗಳ ಕಾಮಗಾರಿಗಳು ಹಾಗೂ ಬಂಟ್ವಾಳ ಮತ್ತು ಉಳ್ಳಾಲ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿಗಳು ಪ್ರಗತಿಯಲ್ಲಿವೆ.
ಸಣ್ಣ ನೀರಾವರಿ ಇಲಾಖೆಯಿಂದ ನೇತ್ರಾವತಿ ಎಡದಂಡೆ ಸಂರಕ್ಷಿಸಲು ಉಳ್ಳಾಲ ತಾಲೂಕಿನ ಪಾವೂರು – ಬೋಳಿಯಾರು ವರೆಗೆ ರೂ.40 ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.
ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ, ಜಲಜೀವನ್ ಮಿಷನ್ ಯೋಜನೆಯಡಿ ಒಟ್ಟು 7 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ. ಜಿಲ್ಲೆಯ 223 ಗ್ರಾಮ ಪಂಚಾಯತ್ ಗಳು ಒಣ ತ್ಯಾಜ್ಯವನ್ನು ನಿರ್ವಹಿಸಲು ಎಂ.ಆರ್.ಎಫ್. ಘಟಕ ಸೌಲಭ್ಯ ಕಲ್ಪಿಸಿರುವ ರಾಜ್ಯದ ಮೊದಲ ಜಿಲ್ಲೆಯಾಗಿದೆ.
ಜಿಲ್ಲಾ ವೆನ್ಹಾಕ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕ್ಯಾಥ್ ಲ್ಯಾಬ್ ಅನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿಸಿದೆ. ಆ ಮೂಲಕ ಅತಿ ಕಡಿಮೆ ವೆಚ್ಚದಲ್ಲಿ ಬಡವರಿಗೆ ಉನ್ನತ ಹೃದ್ರೋಗ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. 90 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಹೊರರೋಗಿ ವಿಭಾಗ(ಒಪಿಡಿ) ಕಟ್ಟಡ ನಿರ್ಮಿಸಲು ಅನುಮೋದನೆ ನೀಡಲಾಗಿದೆ.
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶಿಕ್ಷಣ ವ್ಯವಸ್ಥೆಯನ್ನು ಉನ್ನತೀಕರಣಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ 18 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರಕಾರ ಇತ್ತೀಚೆಗೆ ಮಂಜೂರಾತಿ ನೀಡಿದೆ. ನರ್ಸರಿಯಿಂದ ಪದವಿಪೂರ್ವ ಶಿಕ್ಷಣದವರೆಗೆ ಒಂದೇ ಕ್ಯಾಂಪಸ್ನಲ್ಲಿ ಉನ್ನತ ಗುಣಮಟ್ಟದ ಶಿಕ್ಷಣವನ್ನೊದಗಿಸುವ ಕೆಪಿಎಸ್ ಮಾದರಿಯನ್ನು ಜಿಲ್ಲೆಯ ಇನ್ನಷ್ಟು ಶಾಲೆಗಳಿಗೆ ವಿಸ್ತರಿಸಲು ಗಮನಹರಿಸಲಾಗುವುದು.
ಪಣಂಬೂರು ಮತ್ತು ತಣ್ಣೀರುಬಾವಿ ಕಡಲತೀರಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೊಳಿಸಲು ಕಾರ್ಯಾದೇಶ ನೀಡಲಾಗಿರುತ್ತದೆ. ವಿವಿಧ ಪ್ರವಾಸಿ ಕಾರ್ಯಕ್ರಮಗಳಿಗೆ ಅನುದಾನ ನೀಡುವ ಮೂಲಕ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಒತ್ತು ನೀಡಲಾಗುತ್ತಿದೆ.
ಮಂಗಳೂರಿನಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಆ ಮೂಲಕ ಜಿಲ್ಲೆಯ ಸಾಹಿತ್ಯ ರಂಗಾಸಕ್ತರ ದೀರ್ಘಕಾಲದ ಬೇಡಿಕೆಗೆ ಸರಕಾರ ಸ್ಪಂದಿಸಿದೆ.
ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸದಾಗಿ ಬ್ಯಾರಿ ಭವನವನ್ನು ಉಳ್ಳಾಲ ತಾಲೂಕಿನ ಅಸೈಗೋಳಿ ಎಂಬಲ್ಲಿ ನಿರ್ಮಿಸಲು ರಾಜ್ಯ ಸರಕಾರ ಮಂಜೂರಾತಿ ನೀಡಿದೆ.
ಮಂಗಳೂರು ತಾಲೂಕಿನ ಕಸಬಾ ಹೋಬಳಿಯ ದೇರೆಬೈಲ್ ಗ್ರಾಮದ ಸರ್ವೆ ನಂ.129 ಮತ್ತು 113 ರಲ್ಲಿ 3.285 ಎಕ್ರೆ ಭೂಮಿಯನ್ನು “ವಾಣಿಜ್ಯ ಕಚೇರಿ ಟೆಕ್ ಪಾರ್ಕ್” ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಡಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರವು ಈಗಾಗಲೇ ಅನುಮೋದನೆ ನೀಡಿದೆ. ಈ ಯೋಜನೆಯ ಪ್ರಾಥಮಿಕ ಉದ್ದೇಶವು ಪ್ರದೇಶದ ತಾಂತ್ರಿಕ ಭೂದೃಶ್ಯವನ್ನು ಹೆಚ್ಚಿಸುವುದು, ವೈವಿಧ್ಯಮಯ ತಂತ್ರಜ್ಞಾನ ಕಂಪೆನಿಗಳನ್ನು ಆಕರ್ಷಿಸುವುದು ಮತ್ತು ಗಣನೀಯ ಆರ್ಥಿಕ ಮತ್ತು ಉದ್ಯೋಗ ಬೆಳವಣಿಗೆಯನ್ನು ಹೆಚ್ಚಿಸುವುದಾಗಿದೆ. ಈ ಯೋಜನೆಯಿಂದ ಉದ್ಯೋಗಗಳ ಸೃಷ್ಟಿಯೊಂದಿಗೆ ಸ್ಥಳೀಯ ಜೀವನೋಪಾಯ ಮತ್ತು ಒಟ್ಟಾರೆ ಸಮೃದ್ಧಿ ಸುಧಾರಣೆಯ ನಿರೀಕ್ಷೆಯಿದೆ.
ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟನೆ ನಿಯಂತ್ರಿಸಲು ತಳಪಾಡಿ ಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ.
ಸಹಬಾಳ್ವೆ, ಸಹಿಷ್ಣುತೆಗೆ ಹೆಸರಾದ ನಾವೆಲ್ಲರೂ ಈ ನಾಡಿನ ಪರಂಪರೆ, ಐತಿಹಾಸಿಕತೆ ಮತ್ತು ಸಂಸ್ಕೃತಿಯನ್ನು ಉಳಿಸಲು ಸದಾ ಬದ್ಧರಾಗಿರಬೇಕು. ಜಾತಿ-ಮತಗಳ ಬೇದಭಾವವನ್ನು ತೊರೆದು ಜಿಲ್ಲೆಯ ಎಲ್ಲ ಜನತೆ ಸಹೋದರ ಭಾವನೆಯಿಂದ ನಡೆದುಕೊಳ್ಳುವುದರ ಮೂಲಕ ರಾಜ್ಯ ಹಾಗೂ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುವಲ್ಲಿ ಎಲ್ಲರೂ ಸಹಕರಿಸಬೇಕಾಗಿದೆ, ಈ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ನಾವೆಲ್ಲರೂ ಸೇರಿ ಶ್ರಮಿಸೋಣ ಎಂದು ಆಶಿಸುತ್ತೇನೆ.
ನಾಡಿನ ಮತ್ತು ಜಿಲ್ಲೆಯ ಭೌತಿಕ, ನೈಸರ್ಗಿಕ ಮತ್ತು ಮಾನವ ಸಂಪನ್ಮೂಲಗಳ ಅಭಿವೃದ್ಧಿಯೂ ಸೇರಿದಂತೆ ಸರ್ವಾಂಗೀಣ ಪ್ರಗತಿ ಸಾಧಿಸಲು ನಾವೆಲ್ಲರೂ ಕಂಕಣಬದ್ದರಾಗಿ ಶ್ರಮಿಸೋಣ. ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಸದೃಢ, ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕವನ್ನು ನಿರ್ಮಿಸಲು ಪಣ ತೊಡೋಣ.
ಎಂದೆಂದೂ ಕನ್ನಡ ಉಸಿರಾಗಲಿ, ಕನ್ನಡ ಸದಾ ಹಸಿರಾಗಿರಲಿ, ಎಂಬ ಹಾರೈಕೆಯೊಂದಿಗೆ ಜೈ ಹಿಂದ್ ಜೈ ಕರ್ನಾಟಕ
ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳು ಸೇರಿ 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ವಿವಿಧ ಅಕಾಡೆಮಿ, ನಿಗಮ ಮಂಡಳಿ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









